ನಾಗಲೋಕದ ಶ್ರೀ ಶಂಕಚೂಡನೆಂಬ ನಾಗರಾಜನಿಗೆ, ವರಪ್ರಸಾದದಿಂದ ಜನಿಸಿದ ದೇವರತಿ, ನಾಗರತಿ, ಚಾರುರತಿ, ಮಂದರತಿ ಮತ್ತು ನೀಲರತಿ ಎಂಬ ಐದು ಜನ ಹೆಣ್ಣುಮಕ್ಕಳು ಮಹೇಶ್ವರನ ಮಗ ಸುಬ್ರಹ್ಮಣ್ಯಸ್ವಾಮಿಯನ್ನು ವಿವಾಹವಾಗುವ ಹಂಬಲದಿಂದ, ಪರಮೇಶ್ವರನನ್ನು ಕಾಣಲು ಕೈಲಾಸಕ್ಕೆ ತೆರಳಿ ಅಲ್ಲಿಯ ದ್ವಾರಪಾಲಕ ನಂದಿಯ ಶಾಪದಿಂದಾಗಿ ಸರ್ಪರೂಪದಲ್ಲಿ ಭೂಲೋಕದ ಸಹ್ಯಾದ್ರಿ ಪರ್ವತದ ಬಳಿ ಕಾಡ್ಗಿಚ್ಚಿನಲ್ಲಿಸಿಕ್ಕು ಪರಿತಪಿಸುತ್ತಿದ್ದರು. ವ್ಯಾಘೃಪಾದ ಮಹರ್ಷಿಗಳು ಸಹ್ಯಾದ್ರಿ ಪರ್ವತದ ಬಳಿ ಸಂಚರಿಸುವಾಗ ಅವರನ್ನು ನೋಡಿದ ನಾಗಕನ್ಯೆಯರು ಅವಸರವಾಗಿ ಓಡಾಡಿದಾಗ ಉಂಟಾದ ಭರಭರ ಶಬ್ದಕ್ಕೆ ಹೌಹಾರಿದ ಮಹರ್ಷಿಗಳಿಂದ, ಗತಿ ಕುಂಟಿತವಾಗಿ ಬಿದಿರು ಮಳೆಗೆ ಸೀಮಿತವಾಗಿರುವಂತಹ ಶಾಪಕ್ಕೆ ಆ ನಾಗಕನ್ಯೆಯರು ಗುರಿಯಾಗುತ್ತಾರೆ. ರಾಜಪುರುಷನೊಬ್ಬನಿಂದ ಶಾಪ ವಿಮೋಚನೆಯಾಗುವದೆಂದು ಮಹರ್ಷಿಗಳು ಹರಸಿದಂತೆ,ಆವಂತಿಯ ರಾಜ ದೇವವರ್ಮನು ರಾಜ್ಯಬ್ರಷ್ಠನಾಗಿ ವೇಷ ಮೆರೆಸಿಕೊಂಡು ಸಹ್ಯಾದ್ರಿ ಪರ್ವತದಲ್ಲಿ ತಿರುಗುವಾಗ ಕಾಡ್ಗಿಚ್ಚಿನಲ್ಲಿ ಬೆಂದು ಹೋಗುತ್ತಿರುವ ಐದು ಸರ್ಪಗಳನ್ನು ಉಳಿಸಿ, ಅವುಗಳನ್ನು ಒಂದು ಬಟ್ಟೆಯಲ್ಲಿ ಸುತ್ತಿಕೊಂಡು ಪಶ್ಚಿಮಾಭಿಮುಖವಾಗಿ ಹೋಗುತ್ತಿರುವಾಗ ಆ ಸರ್ಪಗಳು ಒಂದೊಂದಾಗಿ ಹುತ್ತದಲ್ಲಿ ಸೇರಿದವು. ಅವುಗಳಲ್ಲಿ ಮಂದರತಿಯೆಂಬ ನಾಗ ಸರ್ಪವು ಸೇರಿದ ಜಾಗವೇ ಮಂದರತಿ ಕಾನನವೆಂಬ (ಮಂದಾರ್ತಿ ) ಹೆಸರಾಯಿತು.
PARIVARA GOD OF THE TEMPLE